ಹಾವೇರಿ prajakiran.com : ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ವಿಸ್ತರಣೆಯ ಕುರಿತು ಜೂನ್ 5 ರಂದು ನಿಗದಿಯಾಗಿರುವ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಜೂನ್4ರಂದು ಮುಖ್ಯಮಂತ್ರಿ ಬಿ ಎಸ್
ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ವಿವಿಧ ಜಿಲ್ಲೆಗಳಲ್ಲಿರುವ ಪರಿಸ್ಥಿತಿಯನ್ನು ಅವರು ಅರಿತುಕೊಳ್ಳುತ್ತಾರೆ. ಕೆಲ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಕಡಿಮೆ ಇದೆ. ಕೆಲ ಜಿಲ್ಲೆಗಳಲ್ಲಿ ಕಡಿಮೆ ಆಗಬೇಕಾಗಿದೆ.
ಈ ಎಲ್ಲ ಅಂಶಗಳನ್ನು ಗಮನಿಸಿ ತಜ್ಞರು ನೀಡುವ ವರದಿಯನ್ನು ವಿಶ್ಲೇಷಣೆ ಮಾಡಿ ರಾಜ್ಯದಲ್ಲಿ ಲಾಕ್ಡೌನ್ ಯಾವ ರೀತಿ ಇರಬೇಕು ಮತ್ತು ಹೇಗೆ ಮುಂದುವರಿಸಬೇಕು ಎಂಬುದರ ಕುರಿತು ಆ ಸಭೆಯಲ್ಲಿ ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ ಎಂದು ಅವರು ತಿಳಿಸಿದರು.
ಕೋವಿಡ್ ೩ ಅಲೆಗೆ ರಾಜ್ಯ ಸರ್ಕಾರ ತನ್ನ ಶಕ್ತಿ ಮೀರಿ ಸಿದ್ಧತೆಗಳನ್ನು ಮಾಡಿದೆ. ಈಗಾಗಲೇ ರಾಜ್ಯದಲ್ಲಿ 24 ಸಾವಿರಕ್ಕಿಂತ ಹೆಚ್ಚು ಆಕ್ಸಿಜನ್ ಬೆಡ್ ಗಳನ್ನು ಸಿದ್ಧಪಡಿಸಲಾಗಿದೆ.
ವೆಂಟಲೇಲೆಟರ್ ಗಳ ಸಂಖ್ಯೆಯನ್ನು ಶೇಕಡ 100ರಷ್ಟು ಹೆಚ್ಚು ಮಾಡಲಾಗಿದೆ.
ಪ್ರತಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜನ್ ಜನರೇಟರ್ ಮಾಡಬೇಕೆಂದು ತೀರ್ಮಾನಿಸಲಾಗಿದೆ.
ಆಕ್ಸಿಜನ್ ಜನರೇಟರ್ ಇದ್ರೆ ಅಪಾಯದಲ್ಲಿರುವ ಸೋಂಕಿತರಿಗೆ ಅನುಕೂಲ ಆಗುತ್ತದೆ ಎಂದು ಅವರು ಹೇಳಿದರು.
ಜುಲೈ-ಆಗಸ್ಟ್ ಸಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಲಸಿಕೆ ನೀಡುವ ಅಭಿಯಾನ ನಡೆಯಲಿದೆ. ಸದ್ಯಕ್ಕೆ ಕೋವಿಡ್ ವಾರಿಯರ್ ಮತ್ತು ಎರಡನೇ ಡೋಸ್ ಪಡೆಯಲು ಅರ್ಹರಿರುವವರಿಗೆ ಅವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.