ಹಣ್ಣು ತರಕಾರಿ ಮಾರಾಟಗಾರರ 64 ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಎಸಗಿದವರ ವಿರುದ್ದ ಕ್ರಮಕ್ಕೆ ಆಗ್ರಹ
ಧಾರವಾಡ ಪ್ರಜಾಕಿರಣ. ಕಾಮ್ : ಧಾರವಾಡ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ತರಕಾರಿ ಮಾರಾಟಗಾರರಿಗೆ ಲೀಸ್ ಕಮ್ ಸೇಲ್ ಆಧಾರದಲ್ಲಿ ಹಂಚಿಕೆ ಮಾಡಲು ಉದ್ದೇಶಿಸಲಾಗಿದ್ದ 64 ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಎಸಗಿದ ಕುರಿತು ಗುರುವಾರ ಸಂಜೆ ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ನೇತೃತ್ವದಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಯಿತು.
ಧಾರವಾಡ ಎಪಿಎಂಸಿ ಕಾರ್ಯದರ್ಶಿವೀರಭದ್ರಯ್ಯ ಹಿರೇಮಠ, ಎಪಿಎಂಸಿ ಸಹ ಕಾರ್ಯದರ್ಶಿ ಅಜಯ ಹಳೇಮನಿ ಹಾಗೂ ಮಾಜಿ ಆಡಳಿತಾಧಿಕಾರಿ ಪ್ರಭಾಕರ ಅಂಗಡಿ,ಅವರು ನಿಯಮಗಳನ್ನು ಗಾಳಿಗೆ ತೂರಿ ಅನರ್ಹರಿಗೆ ನಿವೇಶನ ಹಂಚಿಕೆ ಮಾಡುವ ಮೂಲಕ ಅರ್ಹ ಅರ್ಜಿದಾರರಿಗೆ ಅನ್ಯಾಯವೆಸಗಿದವರ ವಿರುದ್ದ ತನಿಖೆ ನಡೆಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಯಿತು.
ಈ ವೇಳೆ ಮಾಧ್ಯಮದವರಿಗೆ ಮಾತನಾಡಿದ ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ, ಜೇಷ್ಟತಾ ಪಟ್ಟಿಯಲ್ಲಿನ ಹೆಸರನ್ನು ಕೈ ಬಿಟ್ಟು ರಾಜಕೀಯ ವ್ಯಕ್ತಿಗಳ ಪ್ರಭಾವಕ್ಕೆ ಮಣಿದು ಅನರ್ಹರನ್ನು ಆಯ್ಕೆ ಪಟ್ಟಿಗೆ ಸೇರಿಸಲಾಗಿದೆ.
ಅಲ್ಲದೆ, ಕಳೆದ ಎರಡು ವರ್ಷಗಳಿಂದ ಅನವಶ್ಯಕ ಕಾರಣಗಳನ್ನು ಕೊಡುತ್ತಾ ನಿವೇಶನ ಹಂಚಿಕೆಯನ್ನು ವಿಳಂಭ ಮಾಡಲಾಗಿದೆ. ಆ ಮೂಲಕ ಧಾರವಾಡ ಎಪಿಎಂಸಿ ಕಾರ್ಯದರ್ಶಿ, ಸಹ ಕಾರ್ಯದರ್ಶಿ ಹಾಗೂ ಮಾಜಿ ಆಡಳಿತಾಧಿಕಾರಿ ಕತ್ಯರ್ವಲೋಪ ಎಸಗಿದ್ದಾರೆ ಎಂದು ಆರೋಪಿಸಿದರು.
ಇದರಿಂದಾಗಿ ಹಣ್ಣು ತರಕಾರಿ ವ್ಯಾಪಾರಸ್ಥರು ಸಂಕಷ್ಟ ಎದುರಿಸುವಂತಾಗಿದೆ. ಹೀಗಾಗಿ ಇವರನ್ನು ತಕ್ಷಣದಿಂದ ಸೇವೆಯಿಂದ ಅಮಾನತುಗೊಳಿಸಿ ಇಲಾಖೆ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.
ಅಲ್ಲದೆ, ಈ ಹಿಂದೆ ತಯಾರಿಸಿದ ಜೇಷ್ಟತಾ ಪಟ್ಟಿಯನ್ನು ಈಗಾಗಲೇ ಅನುಮೋದನೆ ನೀಡಲಾಗಿದ್ದು, ಅದರ ಆಧಾರದಲ್ಲಿ 64 ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಂ.ಹೆಚ್, ನವಲಗುಂದಕರ್, ರಾಜು ವೈ,ಎಂ., ಅನ್ವರ್ ಟೀನವಾಲೆ, ಲಕ್ಷ್ಮಣ ಹುಲಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Share on:
WhatsApp