ವಿಶೇಷ ಕಾರ್ಯಾಚರಣೆಗೆ ಧಾರವಾಡ ಜಿಲ್ಲಾಡಳಿತ ನಿರ್ಧಾರ
ಇದುವರೆಗೆ ೩೦ ಲಕ್ಷ ರೂ. ದಂಡ ಆಕರ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ
ಧಾರವಾಡ prajakiran.com : ಕೊರೊನಾ ವೈರಾಣು ನಿಯಂತ್ರಣಕ್ಕೆ ಮಾಸ್ಕ್ ಬಳಕೆ ಕಡ್ಡಾಯವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಈ ನಿಯಮ ಪಾಲಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ.
ಮಾಸ್ಕ್ ಬಳಕೆ ಮಾಡದವರಿಂದ ಜಿಲ್ಲೆಯಲ್ಲಿ ಈಗಾಗಲೇ ೩೦ ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ದಂಡ ವಿಧಿಸುವ ಕಾರ್ಯ ಇನ್ನಷ್ಟು ಚುರುಕುಗೊಳಿಸಲು ನಾಳೆ ಸೆ.೨೫ ರಿಂದ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಪ್ರಾರಂಭಿಸಲಾಗುವುದು.
ಪ್ರತಿಯೊಬ್ಬ ನಾಗರಿಕರು ಮಾಸ್ಕ್ ಬಳಕೆ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಸ್ಕ್ ಬಳಕೆಯಿಂದ ಕೊರೊನಾ ವೈರಾಣು ಹರಡುವಿಕೆ ನಿಯಂತ್ರಿಸಬಹುದು ಎಂಬುದು ಈಗಾಗಲೇ ವೈದ್ಯಕೀಯವಾಗಿ ದೃಢಪಟ್ಟಿದೆ.
ಮಾರುಕಟ್ಟೆ, ಹೋಟೆಲ್, ಪಾನ್ಶಾಪ್ ಮತ್ತಿತರ ಅಂಗಡಿ-ಮುಂಗಟ್ಟು ಸಾರ್ವಜನಿಕ ಸ್ಥಳಗಳಲ್ಲಿ ಜನರು ಮಾಸ್ಕ್ ಬಳಕೆ ಮಾಡುವುದು ಕಡ್ಡಾಯವಾಗಿದೆ.
ಈ ನಿಯಮ ಉಲ್ಲಂಘಿಸಿದರೆ ನಗರ ಪ್ರದೇಶಗಳಲ್ಲಿ ೨೦೦/- ರೂ.ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ೧೦೦/- ರೂ.ದಂಡ ವಿಧಿಸಲು ಸರ್ಕಾರ ಸೂಚಿಸಿದೆ.
ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ದಂಡ ವಿಧಿಸಲು ಪೊಲೀಸ್, ಮಹಾನಗರಪಾಲಿಕೆ, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ಕಂದಾಯ ಸೇರಿದಂತೆ ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡಗಳು ಹುಬ್ಬಳ್ಳಿ-ಧಾರವಾಡ ಅವಳಿನಗರ, ಎಲ್ಲಾ ತಾಲೂಕು ಕೇಂದ್ರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ಆಕರಿಸಲಿವೆ.
ಪ್ರತಿಯೊಬ್ಬರೂ ಮಾಸ್ಕ್ ಧರಿಸುವ ಮೂಲಕ ಕೊರೊನಾ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕು ಎಂಬುದು ಇದರ ಉದ್ದೇಶವಾಗಿದೆ. ಸಂಗ್ರಹವಾದ ದಂಡ ಶುಲ್ಕದ ಮಾಹಿತಿಯನ್ನು ಗೂಗಲ್ ಸ್ಪ್ರೆಡ್ ಶೀಟ್ನಲ್ಲಿ ಕಾಲಕಾಲಕ್ಕೆ ನವೀಕರಿಸಲಾಗುವುದು.
ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ದಂಡ ಶುಲ್ಕ ರಸೀದಿಗಳ ಪುಸ್ತಕಗಳನ್ನು ಒದಗಿಸಬೇಕು ಎಂದು ಸೂಚಿಸಿದರು.
ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ತಲಾ ೮೦ ಜಂಬೋ ವೈದ್ಯಕೀಯ ಆಕ್ಸಿಜನ್ ಸಿಲಿಂಡರ್ಗಳು ಲಭ್ಯ ಇದ್ದು ಸದಾಕಾಲ ಅವು ಭರ್ತಿಯಾಗಿರುವಂತೆ ನೋಡಿಕೊಳ್ಳಬೇಕು ಹಾಗೂ ಖಾಸಗಿ ಆಸ್ಪತ್ರೆಗಳು ಕೋರಿದರೆ ತಾತ್ಕಾಲಿಕವಾಗಿ ಅವರಿಗೆ ನೆರವು ನೀಡಲು ಸಿದ್ಧವಾಗಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.