ಧಾರವಾಡ prajakiran. com ನ.28:
ಇಲ್ಲಿನ ಎಸ್ ಡಿ ಎಂ ಆವರಣದ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಕೋವಿಡ್ ವೈರಾಣು ಸಂಪೂರ್ಣ ಹತೋಟಿಗೆ ಬಂದಿದೆ. ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ.
ಆವರಣದ 500 ಮೀಟರ್ ಸುತ್ತಲಿನ ಪ್ರದೇಶವನ್ನು ಕಂಟೇನ್ಮೆಂಟ್ ವಲಯವೆಂದು ಪರಿಗಣಿಸಿ ಬಿಗಿಕ್ರಮಗಳನ್ನು ಮುಂದುವರೆಸಲಾಗುವುದು ಎಂದು ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
ಎಸ್.ಡಿ.ಎಂ.ಆಸ್ಪತ್ರೆಗೆ ಭೇಟಿ ನೀಡಿದ ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನ.15 ರಿಂದ 19 ರವರೆಗೆ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರು ಭಾಗವಹಿಸಿದ್ದರು.
ಅವರಲ್ಲಿ ಜ್ವರ ,ಕೆಮ್ಮು ಕಂಡು ಬಂದಿದ್ದರಿಂದ ತಪಾಸಣೆಗೊಳಪಡಿಸಿದಾಗ ಕೋವಿಡ್ ದೃಢಪಟ್ಟಿದೆ.ನಂತರ ಉಳಿದರೆಲ್ಲರೂ ಸೇರಿ 3973 ಎಸ್ ಡಿ ಎಂ ವೈದ್ಯರು,ವಿದ್ಯಾರ್ಥಿಗಳು,ಸಿಬ್ಬಂದಿಯನ್ನು ತಪಾಸಣೆಗೊಳಪಡಿಸಲಾಗಿದೆ.
ಎಲ್ಲರ ವರದಿಗಳು ಬಂದಿದ್ದು 306 ಜನರಲ್ಲಿ ಸೋಂಕು ದೃಢಪಟ್ಟಿದೆ. ಎಸ್ ಡಿ ಎಂ ಸುತ್ತಲಿನ 500 ಮೀಟರ್ ವ್ಯಾಪ್ತಿಯ ಜನರನ್ನೂ ಕೂಡ ತಪಾಸಣೆ ಮಾಡಲಾಗುತ್ತಿದೆ. ಮುಖ್ಯಮಂತ್ರಿಗಳೂ ಕೂಡ ಈ ಬಗ್ಗೆ ನಿಯಂತ್ರಣಕ್ಕೆ ವಿಶೇಷ ಗಮನ ನೀಡಿದ್ದಾರೆ ಎಂದರು.
ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ, ಎಸ್ ಡಿ ಎಂ ಡೀಮ್ಡ್ ವಿ.ವಿ.ಕುಲಪತಿ ಡಾ.ನಿರಂಜನ ಕುಮಾರ್,ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ, ಪೊಲೀಸ್ ಉಪ ಆಯುಕ್ತ ಸಾಹಿಲ್ ಬಾಗ್ಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ್ ಮದೀನಕರ್, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಮತ್ತಿತರರು ಇದ್ದರು.