ಧಾರವಾಡ prajakiran.com : ಕೇಂದ್ರ ಸರ್ಕಾರದ ಸಚಿವ ಸಂಪುಟ ಅಂಗೀಕರಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಸ್ವಾಗತಿಸಿದೆ.
ಈ ರಾಷ್ಟ್ರೀಯ ಶಿಕ್ಷಣ ನೀತಿಯು 3ವರ್ಷದ ಮಕ್ಕಳಿಂದ 18 ವರ್ಷದ ಮಕ್ಕಳಿಗೆ ಸಂಬಂಧಿಸಿದಂತೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನೂ ಒಳಗೊಂಡಂತೆ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಬದಲಾಯಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಹಕ್ಕು ಕಾಯಿದೆ ಪ್ರಕರಣ 6, 9, 21 ಹಾಗು 22 ರ ಅನ್ವಯ ಶಾಲಾ ಮತ್ತು ಪಂಚಾಯತಿ ಹಂತದಲ್ಲಿ ಶಾಲಾ ಶಿಕ್ಷಣ ನೀತಿಯನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮ ಮತ್ತು ಗ್ರಾಮ ಪಂಚಾಯತಿಗಳ ಮೇಲಿರುವುದರಿಂದ ನೀತಿಯನ್ನು ನಾವು ನಮ್ಮ ಭಾಷೆಯಲ್ಲಿ ಓದಿ ಅರ್ಥೈಸಿಕೊಳ್ಳುವುದು ನಂತರ ಜಾರಿಗೊಳಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸುವುದು ಬಹಳ ಮುಖ್ಯವಾಗುತ್ತದೆ.
ಮೂಲ ವಾರಸುದಾರರಾದ ನಾವು ನಮ್ಮ ಮಕ್ಕಳ ಶಿಕ್ಷಣವನ್ನು ಹೇಗೆ ರೂಪಿಸಲಾಗಿದೆ ಎಂಬುದನ್ನು ತಿಳಿಯದೆ ಅದನ್ನು ಜಾರಿಗೊಳಿಸುವುದು ಪ್ರಜಾಸತ್ತಾತ್ಮಕವಾಗಿ ಸರಿಯಾದ ಪ್ರಕ್ರಿಯೆಯಲ್ಲ.
ಆದ್ದರಿಂದ , ಅದನ್ನು ಕನ್ನಡದಲ್ಲಿ ತರುವವರೆಗೆ ಆತುರ–ಆತುರವಾಗಿ ಜಾರಿಗೊಳಿಸಬಾರದೆಂದು ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ.
ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವುದರಿಂದ , ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೂಡಲೇ ಕನ್ನಡದಲ್ಲಿ ಹೊರತಂದು ಶಾಲೆ ,ಪಂಚಾಯತಿ,ತಾಲ್ಲೂಕು, ಜಿಲ್ಲೆ ಹಾಗು ರಾಜ್ಯ ಹಂತದಲ್ಲಿ ಅದರ ಸಾಧಕ–ಬಾಧಕಗಳ ಬಗ್ಗೆ ಚರ್ಚಿಸಿ, ಈ ಚರ್ಚೆಗಳ ಆಧಾರದ ಮೇಲೆ ನಮ್ಮ ರಾಜ್ಯಕ್ಕೆ ಅನುವಾಗುವ
“ ಕರ್ನಾಟಕ ಶಿಕ್ಷಣ ನೀತಿ”(ಕಶಿನೀ) ರೂಪಿಸುವುದು ಸೂಕ್ತವೆಂದು ನಾವು ಭಾವಿಸುತ್ತೇವೆ. ನಂತರ ಕರ್ನಾಟಕ ಶಿಕ್ಷಣ ನೀತಿಯನ್ನು, ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಎರಡರಲ್ಲೂ ಮಂಡಿಸಿ, ಚರ್ಚಿಸಿ ಅಂಗೀಕರಿಸಿದ ನಂತರವೇ ಜಾರಿಗೊಳಿಸಬೇಕೇಂದು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯಧ್ಯಕ್ಷೆ ಲತಾ ಮುಳ್ಳೂರ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುಳ ಬಿ ಆಗ್ರಹಿಸಿದ್ದಾರೆ.