ಧಾರವಾಡ prajakiran.com : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಹಾಗೂ ಸಾರ್ವಜನಿಕ ಲೆಕ್ಕ ಪತ್ರಗಳ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಹೀಗಾಗಿ ಸಚಿವರು ಬೇಷರತ್ ಕ್ಷಮೆ ಕೋರಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆಗ್ರಹಿಸಿದರು.
ಅವರು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಕೆಲವರಿಗೆ ಕರೊನಾ ಬಂದಿರುವುದು ನಿಜ.
ಈ ವಿಷಯವನ್ನು ಪಕ್ಷ ಮುಚ್ಚಿಡುವ ಪ್ರಯತ್ನವನ್ನೂ ಮಾಡಿಲ್ಲ. ಆದರೆ ಸಚಿವರು ಮಾತ್ರ ಆ ಕಾರ್ಯಮದಿಂದಲೇ ಕರೊನಾ ಹಾವಳಿ ಹೆಚ್ಚಿದೆ ಎಂಬ ರೀತಿಯಲ್ಲಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೋವಿಡ್ ನಿರ್ವಹಣೆಗೆ ಸರ್ಕಾರ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿಚಾರವನ್ನು ಸಮಿತಿ ಸಭೆಯಲ್ಲಿ ಆಡಳಿತ ಪಕ್ಷದ ಶಾಸಕರೇ ಪ್ರಸ್ತಾಪಿಸಿದ್ದಾರೆ. ಅದು ಸರ್ಕಾರಿ ದಾಖಲೆಯಲ್ಲೂ ನಮೂದಾಗಿದೆ.
ಆದರೆ ಜೋಶಿ ಅವರು, ಸಾರ್ವಜನಿಕ ಲೆಕ್ಕ ಪತ್ರಗಳ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಅವರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ಕಾಂಗ್ರೆಸ್ನಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಸಿಗದ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಕೇಂದ್ರ ಸರ್ಕಾರದ ಪ್ರಮುಖ ಹುದ್ದೆ ನಿಭಾಯಿಸುತ್ತಿರುವ ಜೋಶಿ ಅವರು ಸಂಬಂಧಪಟ್ಟ ರಾಜ್ಯ ಸಚಿವರ ಕಿವಿ ಹಿಂಡಿ ಸರಿಯಾದ ಮಾಹಿತಿ ನೀಡುವಂತೆ ಸೂಚನೆ ಮಾಡಬೇಕು.
ಅದನ್ನು ಬಿಟ್ಟು ತಪ್ಪು ಎತ್ತಿ ಹಿಡಿದವರ ಮೇಲೆ ಆರೋಪ ಮಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಯಾವುದೇ ಅವ್ಯವಹಾರ ನಡೆಸದಿದ್ದರೆ, ಉಪಕರಣಗಳ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸಿ ಶ್ವೇತಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು.
ಇನ್ನು ಧಾರವಾಡ ಜಿಲ್ಲಾಧಿಕಾರಿ ಅವರು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ವಿನೂತನ ಯೋಜನೆ ಜಾರಿಗೆ ತಂದಿರುವುದು ಸ್ವಾಗತಾರ್ಹ.
ಆದರೆ ಕಂದಾಯ ಇಲಾಖೆ ಅಧಿಕಾರಿಗಳು ಅರ್ಜಿ ಸಲ್ಲಿಸಿದ ಜನರನ್ನು ಹತ್ತಾರು ಬಾರಿ ಕಚೇರಿಗೆ ಅಲೆದಾಡಿಸುವ ಈ ಸಂದರ್ಭದಲ್ಲಿ ಈ ಯೋಜನೆ ಕಟ್ಟುನಿಟ್ಟಾಗಿ ಜಾರಿಗೆ ಬರುವುದು ಕಷ್ಟ.
ಹೀಗಾಗಿ ಅಧಿಕಾರಿಗಳ ಜತೆಗೆ ಸಭೆ ನಡೆಸಿ, ಜನರು ವಾಟ್ಸ್ಅಪ್ಗೆ ಅರ್ಜಿ ಸಲ್ಲಿಸಿದ ಬಳಿಕ ಎಷ್ಟು ದಿನಗಳಲ್ಲಿ ವಿಲೇವಾರಿ ಮಾಡಿ ಸಂಬಂಧಿಸಿದವರಿಗೆ ಮಾಹಿತಿ ನೀಡಲಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕು.
ಅಂದಾಗ ಮಾತ್ರ ಯೋಜನೆ ಲಾಭ ಜನರಿಗೆ ಮುಟ್ಟಲು ಸಾಧ್ಯ. ಇಲ್ಲವಾದಲ್ಲಿ ಈ ಯೋಜನೆ ಕರೊನಾದಿಂದ ಜನರನ್ನು ದೂರವಿಡಲು ಮಾತ್ರ ಪ್ರಾರಂಭಿಸಿದಂತೆ ಎಂಬ ಸಂದೇಶ ರವಾನಿಸಿದಂತಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭೋವಿ, ಎಸ್.ಎ. ಪವಾರ, ಅಕ್ಷಯ ಪಾಟೀಲ, ಇತರರು ಉಪಸ್ಥಿತರಿದ್ದರು.