ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿ ಮೂರ್ತಿ ಕೇವಲ 5 ಅಡಿ ಎತ್ತರ : ಪಿಓಪಿ ಗಣಪತಿ ಮೂರ್ತಿ ನಿಷೇಧ

ಧಾರವಾಡ prajakiran. com ಆ.18 : ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿ ಮೂರ್ತಿಗಳು 5 ಅಡಿ ವರೆಗೆ ಮಾತ್ರ ಎತ್ತರ ಇರಬಹುದು.

ಪಿಓಪಿ ಗಣಪತಿ ಮೂರ್ತಿಗಳನ್ನು ನಿಷೇಧಿಸಿದೆ. ಮಣ್ಣಿನಿಂದ ತಯಾರಿಸಿದ ಗಣಪತಿ ಮೂರ್ತಿಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಗಣೇಶೋತ್ಸವದ ನಿಮಿತ್ಯ ಹುಬ್ಬಳ್ಳಿ ಧಾರವಾಡ ಗಣೇಶೋತ್ಸವ ಸಮಿತಿ ಮಹಾಮಂಡಳಗಳ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ, ಮಾತನಾಡಿದರು.

ಗಣೇಶ ಚತುರ್ಥಿಯಂದು ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಸ್ಥಾಪನೆಗೆ ಸರಕಾರ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗದರ್ಶಿಸೂತ್ರಗಳನ್ನು ನೀಡಿದೆ. ಪಿಓಪಿ ಗಣಪತಿ ಮೂರ್ತಿಗಳ ಸ್ಥಾಪನೆಗೆ ಸರ್ಕಾರ 2016 ರಲ್ಲಿ ನಿರ್ಬಂಧಿಸಿ ಆದೇಶಿಸಿದೆ.

ಆದೇಶ ಉಲ್ಲಂಘಿಸಿ ಪಿಓಪಿ ಗಣಪತಿ ಸ್ಥಾಪಿಸಿದರೆ ಮತ್ತು ಜಲಮೂಲಗಳಲ್ಲಿ ವಿಸರ್ಜಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಿ ರೂ.10 ಸಾವಿರ ದಂಡ ಮತ್ತು ಜೈಲುವಾಸ ವಿಧಿಸಬಹುದಾಗಿದೆ.

ಅವಳಿ ನಗರ ಹಾಗೂ ಜಿಲ್ಲೆಯ ಯಾವುದೇ ಸ್ಥಳದಲ್ಲಿ ಪಿಓಪಿ ಗಣೇಶ ವಿಗ್ರಹಗಳ ದಾಸ್ತಾನು, ಮಾರಾಟ ಕಂಡುಬಂದರೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಹಾಯವಾಣಿ ಹಾಗೂ ಮಹಾನಗರ ಪಾಲಿಕೆ ಸಹಾಯವಾಣಿಗೆ ಕರೆಮಾಡಿ ಮಾಹಿತಿ ನೀಡಬಹುದು.

ಅಧಿಕಾರಿಗಳ ತಂಡ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತದೆ. ಮತ್ತು ದಾಸ್ತಾನು ಹೊಂದಿರುವ ಪಿಓಪಿ ವಿಗ್ರಹಗಳನ್ನು ಜಪ್ತಿ ಮಾಡಿ, ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಸಾರ್ವಜನಿಕರು ಪರಿಸರ ಸ್ನೇಹಿ ಮಣ್ಣಿನ ಗಣೇಶ ವಿಗ್ರಹಗಳನ್ನು ಸ್ಥಾಪಿಸಿ ಹಬ್ಬ ಆಚರಿಸಬೇಕೆಂದು ಜಿಲ್ಲಾಧಿಕಾರಿ ಹೇಳಿದರು.

ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳೊಂದಿಗೆ ಗಣೇಶ ವಿಗ್ರಹಗಳ ಸಾಗಾಟ ಹಾಗೂ ಮಾರಾಟ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು.

ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಪಿಓಪಿ ಗಣೇಶ ವಿಗ್ರಹಗಳು ಜಿಲ್ಲೆಗೆ ಬರದಂತೆ ತಡೆಯಲು ಪೊಲೀಸ್ ಚೇಕ್‍ಪೋಸ್ಟ್‍ಗಳಲ್ಲಿ ನಿರಂತರ ನಿಗಾವಹಿಸಬೇಕೆಂದು ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಸ್ಥಾಪನೆಗೆ ಸಮಿತಿಯವರು ಸ್ಥಳೀಯ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಮತ್ತು ಸರ್ಕಾರದ ಎಲ್ಲ ನಿಯಮಗಳನ್ನು ಪಾಲಿಸುವ ಜವಾಬ್ದಾರಿ ಸಮಿತಿ ಮೇಲೆ ಇರುತ್ತದೆ.

ರಾಸಾಯನಿಕ ಬಣ್ಣ ಬಳಕೆ ಮಾಡಿದ ವಿಗ್ರಹಗಳನ್ನು ಬಳಸಬಾರದು ಮತ್ತು ನಿಗದಿತ ಸ್ಥಳ ಹೊರತುಪಡಿಸಿ ಇತರ ಜಲಮೂಲಗಳಲ್ಲಿ ವಿಸರ್ಜಿಸಬಾರದು ಎಂದು ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಸ್ಥಾಪನೆಗೆ ಶೀಘ್ರವಾಗಿ ಅನುಮತಿ ಪಡೆಯಲು ಮಹಾನಗರ ಪಾಲಿಕೆ ಹಾಗೂ ನಗರ ಪ್ರದೇಶಗಳಲ್ಲಿ ಏಕಗವಾಕ್ಷಿ (ಸಿಂಗಲ್ ವಿಂಡೋ) ಮೂಲಕ ವ್ಯವಸ್ಥೆ ಕಲ್ಪಿಸಲಾಗುವುದು.

ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಗಣೇಶ ವಿಸರ್ಜನೆಯ ಸ್ಥಳಗಳನ್ನು ಗುರುತಿಸಿ, ಮುಂಚಿತವಾಗಿಯೇ ನೋಟಿಪಿಕೇಶನ್ ಮಾಡಬೇಕು.

ಗಣೇಶ ವಿಸರ್ಜನೆಯ ದಿನಗಳಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಮಹಾನಗರ ಪಾಲಿಕೆಯು ಸಾರ್ವಜನಿಕರಿಗೆ ಮೊಬೈಲ್ ಟ್ಯಾಂಕರ್‍ಗಳ ಸೌಲಭ್ಯ ಕಲ್ಪಿಸಬೇಕು.

ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ ಮೊಬೈಲ್ ಟ್ಯಾಂಕರ್ ಸಂಚರಿಸುವ ಮಾರ್ಗ, ಸ್ಥಳ ಮತ್ತು ಸಮಯವನ್ನು ತಿಳಿಸಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.

ಗಣೇಶೋತ್ಸವದಲ್ಲಿ ಪ್ಲಾಸ್ಟಿಕ್‍ನಿಂದ ತಯಾರಿಸಿದ ಪ್ಲೇಕ್ಸ್ ಹಾಗೂ ಬ್ಯಾನರ್‍ಗಳ ಬಳಕೆಯನ್ನು ನಿಷೇಧಿಸಲಾಗಿದೆ. ಬಟ್ಟೆ ಬ್ಯಾನರ್‍ಗಳನ್ನು ಮಾತ್ರ ಬಳಸಬೇಕು.

ಸರ್ಕಾರವು ಜುಲೈ 1, 2022 ರಿಂದಲೇ ಏಕಬಳಕೆಯ ಪ್ಲಾಸ್ಟಿಕ್ ನಿಷೇಧಿಸಿ ಆದೇಶಿಸಿದೆ. ಸಮಿತಿ ಹಾಗೂ ಸಾರ್ವಜನಿಕರು ಬಟ್ಟೆ ಬ್ಯಾನರ್‍ಗಳನ್ನು ಮಾತ್ರ ಬಳಸಬೇಕು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಮಟ್ಟದಲ್ಲಿ ಪಾಲಿಕೆ ಮತ್ತು ಪೊಲೀಸ್ ಅಧಿಕಾರಿಗಳು ಜಂಟಿ ಆಗಿ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳೊಂದಿಗೆ ಸಭೆ ಜರುಗಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಮನವರಿಕೆ ಮಾಡಿ, ಶಾಂತಿ ಸುವ್ಯವಸ್ಥೆಯಿಂದ ಗಣೇಶೋತ್ಸವ ಆಚರಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಮಾತನಾಡಿ, ಗಣೇಶೋತ್ಸವ ಆಚರಣೆಗೆ ಈಗಾಗಲೇ ಜಾರಿಯಲ್ಲಿರುವ ನಿಯಮ ಮತ್ತು ಆದೇಶಗಳು ಅನ್ವಯಿಸುತ್ತವೆ.

ಗಣೇಶ ವಿಗ್ರಹ 5 ಅಡಿಗೆ ಮಾತ್ರ ಸೀಮಿತವಿರಲಿ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ನಿಗದಿ ಪಡಿಸಿದ ಡಿಸೆಬಲ್ ಹೊಂದಿರುವ ಧ್ವನಿವರ್ಧಕಗಳನ್ನು ಬಳಸಲು ಅವಕಾಶವಿದೆ. ಡಿಜೆ ಬಳಕೆಗೆ ಅವಕಾಶವಿಲ್ಲ. ಈ ಕುರಿತು ಸಮಿತಿಯವರು ಸಹಕಾರ ನೀಡಬೇಕು ಎಂದು ಅವರು ಹೇಳಿದರು.

ಸಾರ್ವಜನಿಕ ಗಣೇಶ ವಿಗ್ರಹ ಸ್ಥಾಪನೆಗೆ ಏಕಗವಾಕ್ಷಿ ಮೂಲಕ ಅನುಮತಿ ಪಡೆದ ಪತ್ರದ ಪ್ರತಿಯನ್ನು ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ಕಳುಹಿಸಬೇಕು.

ಗಣೇಶೋತ್ಸವದಲ್ಲಿ ಹಸಿರು ಪಟಾಕಿಗಳ ಬಳಕೆಗೆ ಮಾತ್ರ ಅವಕಾಶವಿದೆ. ಸರ್ಕಾರ ಇದರ ಬಗ್ಗೆ ಈಗಾಗಲೇ ಆದೇಶ ಹೊರಡಿಸಿದೆ.

ಉತ್ಸವ ಸಮಿತಿಗಳು ಹಸಿರು ಪಟಾಕಿ ಬಳಕೆಗೆ ಪ್ರೋತ್ಸಾಹಿಸಬೇಕು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ಅವಳಿ ನಗರದ ಹಾಗೂ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಹಸಿರು ಪಟಾಕಿ ಬಳಕೆಯ ಬಗ್ಗೆ ಹಾಗೂ ಹಸಿರು ಪಟಾಕಿಗಳನ್ನು ಗುರುತಿಸುವ ಬಗ್ಗೆ ಪ್ರಾತ್ಯಕ್ಷಿಕೆ (ಡೆಮೋ) ನೀಡಿ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು  ಹೇಳಿದರು.

ಮಹಾನಗರ ಪಾಲಿಕೆಯ ಆಯುಕ್ತ ಡಾ.ಗೋಪಾಲಕೃಷ್ಣ ಬಿ., ಮಾತನಾಡಿ ಅವಳಿ ನಗರದಲ್ಲಿ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅನುಕೂಲವಾಗುವಂತೆ ರಸ್ತೆದುರಸ್ತಿ ಕಾರ್ಯ ಕೈಗೊಳ್ಳಲಾಗುವುದು.

ಗಣೇಶ ವಿಗ್ರಹಗಳ ವಿಸರ್ಜನೆಗೆ ಜಲಮೂಲ ಗುರುತಿಸಿ, ಸ್ವಚ್ಛಗೊಳಿಸಿ, ದೀಪದ ವ್ಯವಸ್ಥೆ ಮಾಡಲಾಗುವುದು. ಮತ್ತು ಈ ಕುರಿತು ನೋಟಿಪಿಕೇಶನ್ ಹೊರಡಿಸಲಾಗುವುದು.

ಗಣೇಶ ವಿಸರ್ಜನೆ ಸ್ಥಳಕ್ಕೆ ಹೋಗಲು ಮಾರ್ಗಸೂಚಿ ಫಲಕಗಳನ್ನು ಹಾಕಲಾಗುವುದು. ಮತ್ತು ಮನೆ ಮನೆ ಗಣಪಗಳನ್ನು ವಿಸರ್ಜಿಸಲು ಅನುಕೂಲವಾಗುವಂತೆ ಅವಳಿ ನಗರದ ಪ್ರಮುಖ ಸ್ಥಳಗಳಲ್ಲಿ ಮೊಬೈಲ್ ಟ್ಯಾಂಕರ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಉಪಪೊಲೀಸ್ ಆಯುಕ್ತ ಸಾಹೀಲ್ ಬಾಗ್ಲಾ ಮಾತನಾಡಿ, ಗಣೇಶ ಸ್ಥಾಪನೆ ಹಾಗೂ ವಿಸರ್ಜನೆಯ ದಿನಗಳಂದು ಮಾಡುವ ಮೆರವಣಿಗೆಯು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದ ಮಾರ್ಗದಲ್ಲಿ ಸಂಚರಿಸಬೇಕು. ಮತ್ತು ಗಣೇಶ ವಿಸರ್ಜನೆ ದಿನಗಳಂದು ಸಂಚಾರ ದಟ್ಟನೆಯಾಗದಂತೆ ಕ್ರಮ ವಹಿಸಲಾಗುವುದೆಂದು ಅವರು ಹೇಳಿದರು.

ಶಿಸ್ತುಬದ್ಧತೆ, ನಿಯಮಪಾಲಿಸುವ ಸಮಿತಿಗೆ ಪುರಸ್ಕಾರ: ಪ್ರಸಕ್ತ ಸಾಲಿನ ಗಣೇಶೋತ್ಸವದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಶಿಸ್ತುಬದ್ಧವಾಗಿ ಮತ್ತು ಸರ್ಕಾರ, ಜಿಲ್ಲಾಡಳಿತ ನೀಡಿರುವ ನಿಯಮಗಳನ್ನು ಪಾಲಿಸುವ ಮೂಲಕ ಗಣೇಶೋತ್ಸವವನ್ನು ಆಚರಿಸುವ ಸಮಿತಿಗಳನ್ನು ಗುರುತಿಸಿ ಹುಬ್ಬಳ್ಳಿ, ಧಾರವಾಡ ಮತ್ತು ತಾಲೂಕು ಮಟ್ಟದಲ್ಲಿ ಆಯ್ಕೆಮಾಡಿ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಸಭೆಯಲ್ಲಿ ಅವಳಿನಗರದ ಗಣೇಶೋತ್ಸವ ಸಮಿತಿ ಮಾಹಾಮಂಡಳದ ಅಮರೇಶ ಹಿಪ್ಪರಗಿ, ಅಲ್ತಾಫ್ ಹಳ್ಳೂರ, ವಸಂತ ಅರ್ಕಾಚಾರಿ, ಸಿದ್ದು ಮೊಗಲಿಶೆಟ್ಟರ, ಶಂಕರ ಕುಂಬಿ, ಕಲಾವಿದ ಮಂಜುನಾಥ ಹಿರೇಮಠ ಸೇರಿದಂತೆ ಇತರರು ಮಾತನಾಡಿದರು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಶೋಭಾ ಪೋಳ್ ಸ್ವಾಗತಿಸಿ, ಗಣೇಶೋತ್ಸವ ಆಚರಣೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ.ಶಂಕ್ರಪ್ಪ, ಪಾಲಿಕೆಯ ಪರಿಸರ ಅಧಿಕಾರಿ ನಯನಾ ಸೇರಿದಂತೆ ವಿವಿಧ ಅಧಿಕಾರಿಗಳು, ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯ ನಂತರ ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಹುಬ್ಬಳ್ಳಿ ಧಾರವಾಡ ಗಣೇಶೋತ್ಸವ ಸಮಿತಿ ಮಹಾಮಂಡಳ ಪರವಾಗಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರನ್ನು ಸಮಿತಿ ಸದಸ್ಯರು ಸನ್ಮಾನಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *