ಬಿಳಿಗಿರಿ ಶ್ರೀನಿವಾಸ
ಚಾಮರಾಜನಗರ prajakiran.com : ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕಾಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾಗಮ ಕಲಿಕಾ ಕೇಂದ್ರದಲ್ಲಿ ಅಕ್ಟೋಬರ್ 3 ರಂದು ಪರಿಶಿಷ್ಟ ಜಾತಿ ಮಕ್ಕಳನ್ನು ನಿಂದಿಸಿರುವ ಘಟನೆ ಸಂಬಂಧ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಗುಂಡ್ಲುಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಘಟನೆಯ ದೂರಿನ ಸಂಬಂಧ ಗ್ರಾಮದ ಮುಖಂಡರ ಸಮ್ಮುಖದಲ್ಲಿ ಘಟನೆ ಬಗ್ಗೆ ವಿಚಾರಣೆ ನಡೆಸಿ ಸಂಬಂಧಿಸಿದ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿಮಾಡಿದ್ದಾರೆ.
ಉತ್ತರ ಪಡೆದು ಸದರಿ ಉತ್ತರವನ್ನಾಧರಿಸಿ ನಿಯಮಾನುಸಾರ ಕ್ರಮ ಜರುಗಿಸುವುದಾಗಿ ಪ್ರಾಥಮಿಕ ತನಿಖಾ ವರದಿಯಲ್ಲಿ ಬಿಇಒ ತಿಳಿಸಿದ್ದಾರೆ.
ಅದರಂತೆ ಸದರಿ ಘಟನೆಯನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು ಘಟನೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಸಂಬಂಧಿಸಿದ ಶಿಕ್ಷಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಟಿ.ಜವರೇಗೌಡ ಸ್ಪಷ್ಟಪಡಿಸಿದ್ದಾರೆ.