ಧಾರವಾಡ prajakiran.com : ಇಲ್ಲಿನ ಸುಪರ್ ಮಾರ್ಕೆಟ್ ನಲ್ಲಿನ ಅಂಗಡಿಗಳನ್ನು ತೆರವುಗೊಳಿಸುವುದಕ್ಕೆ ಅಂಗಡಿಕಾರರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಭಾನುವಾರ ನಡೆಯಿತು.
ಬೆಳಗ್ಗೆ ಪಾಲಿಕೆಯ ಅಧಿಕಾರಿಗಳು ಅಂಗಡಿಗಳನ್ನು ತೆರವುಗೊಳಿಸಲು ಜೆಸಿಬಿ ಸಮೇತ ಆಗಮಿಸಿ ಕಾರ್ಯಾಚರಣೆ ನಡೆಸಲು ಮುಂದಾದರು.
ಆಗ ಕಾಂಗ್ರೆಸ್ ಮುಖಂಡರಾದ ದೀಪಕ ಚಿಂಚೋರೆ, ಇಸ್ಮಾಯಿಲ್ ತಮಟಗಾರ, ನೇತೃತ್ವದಲ್ಲಿ ಅಂಗಡಿಕಾರರು ಪ್ರತಿಭಟನೆಗಿಳಿದರು.
ಸುಪರ್ ಮಾರ್ಕೆಟ್ ಅಭಿವೃದ್ಧಿ ಸಂದರ್ಭದಲ್ಲಿ ಅಂಗಡಿಕಾರರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು.
ಅಲ್ಲದೇ ಈ ಕುರಿತು ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಹಂತದಲ್ಲಿದೆ.
ಆದ್ದರಿಂದ ಅಂಗಡಿಕಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.
ಇದೇ ಸಲಹೆಯನ್ನು ನ್ಯಾಯಾಲಯ ಕೂಡ ನೀಡಿದೆ. ಕಾರಣ ಪಾಲಿಕೆ ಅಧಿಕಾರಿಗಳು ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮೂಲಕ ಜೀವನ ನಡೆಸಲು ಸಹಕರಿಸಬೇಕು.
ಅಲ್ಲದೇ ಅಂಗಡಿಕಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಮುನ್ಸೂಚನೆ ನೀಡಿ ತೆರವುಗೊಳಿಸಬೇಕು. ಅಲ್ಲಿತನಕ ಅಂಗಡಿಗಳನ್ನು ತೆರವುಗೊಳಿಸಬಾರದು ಎಂದು ಆಗ್ರಹಿಸಿದರು.
ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಅಂಗಡಿಗಳ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಮತ್ತು ಕಾಂಗ್ರೆಸ್ ಮುಖಂಡರ ಮಧ್ಯೆ ಮಾತಿನ ಚಕಮಕಿ ಕೂಡ ನಡೆಯಿತು.