ಬೆಳಗಾವಿ ಪ್ರಜಾಕಿರಣ.ಕಾಮ್ ಫೆ. 27 : ಜಲಜೀವನ ಮಿಷನ್ ಯೋಜನೆಗೆ ಶಂಕುಸ್ಥಾಪನೆ, ನವೀಕೃತ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸುವಿಕೆ, ಲೊಂಡ-ಬೆಳಗಾವಿ-ಘಟಪ್ರಭಾ ಮಾರ್ಗದ ಡಬ್ಲಿಂಗ್ ಕಾಮಗಾರಿ ಸೇರಿದಂತೆ 2240 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಳಗಾವಿಯ ಹೊರವಲಯದ ಮಾಲಿನಿ ಸಿಟಿ ಮೈದಾನಲ್ಲಿ ಏರ್ಪಡಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಸೋಮವಾರ ರಾಷ್ಟ್ರಕ್ಕೆ ಸಮರ್ಪಿಸಿದರು.
ಅಂತಾರಾಷ್ಟ್ರೀಯ ಸಿರಿ ಧಾನ್ಯ ಮೇಳದ ನೆನಪಿನಾರ್ಥ
ಸಿರಿಧಾನ್ಯಗಳನ್ನು ಮಡಿಕೆಗೆ ತುಂಬುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ 13ನೇ ಕಂತಿನ 16800 ಕೋಟಿ ರೂ.ಹಣವನ್ನು ಎಂಟು ಕೋಟಿಗೂ ಅಧಿಕ ರೈತರಿಗೆ ನೇರ ನಗದು ವರ್ಗಾವಣೆ ಮುಖಾಂತರ ವರ್ಗಾಯಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಜಲಜೀವನ ಮಿಷನ್ ಯೋಜನೆಯಡಿ ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ 40 ಲಕ್ಷ ಮನೆಗಳಿಗೆ ನೀರು ತಲುಪಿಸಲಾಗಿದೆ.
ಈ ಬೃಹತ್ ಯೋಜನೆಯ ಬಗ್ಗೆ ಇದ್ದ ಸಂಶಯವನ್ನು ಸಂಕಲ್ಪವನ್ನಾಗಿಸಿ, ಅನಿಶ್ಚಿತತೆಯಿಂದ ನಿಶ್ಚಿತತೆಗೆ ಕೊಂಡೊಯ್ದು, ಆಸಾಧ್ಯವಾದುದನ್ನು ಪ್ರಧಾನಿ ಮೋದಿಯವರು ಸಾಧ್ಯವಾಗಿಸಿದ್ದಾರೆ ಎಂದರು.
ಅವರು ಇಂದು ಬೆಳಗಾವಿಯಲ್ಲಿ 2240 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಸಮರ್ಪಿಸಲು ಏರ್ಪಡಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ರೈತರಿಗಾಗಿ ಕೃಷಿ ಸಮ್ಮಾನ್ ಯೋಜನೆಯ ಮೂಲಕ ರೈತರ ಖಾತೆಗೆ ನೇರವಾಗಿ ಹಣ ತಲುಪಿಸಲಾಗುತ್ತಿದ್ದು, ರೈತರು ಕೃಷಿಗೆ ಬೀಜ, ಗೊಬ್ಬರ ಖರೀದಿಗೆ ಅನುಕೂಲ ಕಲ್ಪಿಸಲಾಗಿದೆ.
ರೈತರ ಪರವಾಗಿ ನಿಂತು ಯೋಜನೆಗಳನ್ನು ಪ್ರಧಾನಿ ಮೋದಿಯವರು ರೂಪಿಸಿದ್ದಾರೆ. ರಾಜ್ಯದಲ್ಲಿ ರೈತವಿದ್ಯಾನಿಧಿ, ಯಶಸ್ವಿನಿ, ಭೂಸಿರಿಯಂತಹ ರೈತಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.
ರೈತರಿಗೆ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡುತ್ತಿದೆ.
ಪ್ರಧಾನ ಮಂತ್ರಿ ಬೆಳೆ ವಿಮಾ ಯೋಜನೆಯಲ್ಲಿ ಹೆಚ್ಚಿನ ಬೆಳೆ ವಿಮೆ ಬಿಡುಗಡೆಯಾಗಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ರೈಲ್ವೆ ನಿಲ್ದಾಣಗಳ ನಿರ್ಮಾಣ , ಕಳೆದ ಐದು ವರ್ಷದಲ್ಲಿ 6 ಸಾವಿರ ಕಿ.ಮಿ. ರಾಷ್ಟ್ರೀಯ ಹೆದ್ದಾರಿಯನ್ನು ರಾಜ್ಯಕ್ಕೆ ನೀಡಲಾಗಿದೆ. ಧಾರವಾಡ-ಬೆಳಗಾವಿ, ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆಗಳು ಶೀಘ್ರದಲ್ಲಿ ಪ್ರಾರಂಭವಾಗುತ್ತದೆ.
ಜಲಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರು ತಲುಪಿಸುವ ಸಂಕಲ್ಪವನ್ನು ಪ್ರಧಾನಿ ಮೋದಿಯವರು ಮಾಡಿದರು. ಕಳೆದ 3 ವರ್ಷಗಳಲ್ಲಿ 10 ಕೋಟಿಗೂ ಮನೆಗಳಿಗೆ ನೀರು ತಲುಪಿಸಿದ ಭಾರತದ ಭಗೀರಥ ಎನಿಸಿದ್ದಾರೆ.
ಭಾರತದ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕವೂ 1 ಟ್ರಿಲಿಯನ್ ಆರ್ಥಿಕತೆಯ ಕೊಡುಗೆ ನೀಡುವ ಸಂಕಲ್ಪವನ್ನು ಸರ್ಕಾರ ಮಾಡಿದೆ ಎಂದರು.