ಧಾರವಾಡ prajakiran.com : ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ಪೊಲೀಸರು ವಕೀಲ ವಿನೋದ ಪಾಟೀಲ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಧಾರವಾಡ ವಕೀಲರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ ವಕೀಲರು ಕೋರ್ಟ್ ಕಲಾಪದಿಂದ ಸ್ವಯಂಪ್ರೇರಣೆಯಿಂದ ದೂರವುಳಿದು ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ವಕೀಲರ ಸಂಘದ ವಿನೋದ ಶಂಕರಗೌಡ ಪಾಟೀಲ್ ಅವರ ಮೇಲೆ ಹುಬ್ಬಳ್ಳಿಯ ನವನಗರ ಎಪಿಎಂಸಿ ಪೊಲೀಸ್ ಠಾಣೆ ಪೊಲೀಸರು ಸುಳ್ಳು ಮೊಕದ್ದಮೆ ದಾಖಲಿಸಿದಲ್ಲದೆ, ಹಲ್ಲೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ದೂರಿದರು.
ಎಪಿಎಂಸಿ ಪೊಲೀಸ್ ಠಾಣೆಯ ಸಿಪಿಐ ಪ್ರಭು ಸೂರಿನ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳ ವಿರುದ್ದ ಇಲಾಖಾ ವಿಚಾರಣೆ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು.
ಕೂಡಲೇ ವಕೀಲರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಮನವಿ ಸಲ್ಲಿಸಲು ಆಗಮಿಸಿದ ವಕೀಲರು ಮತ್ತು ಪೊಲೀಸರ ನಡುವೆ ಕೆಲವೊತ್ತು ಮಾತಿನ ಚಕಮಕಿ ನಡೆಯಿತು.
ಜಿಲ್ಲಾಧಿಕಾರಿಗಳು ಖುದ್ದಾಗಿ ಬಂದು ಮನವಿ ಸ್ವೀಕಾರ ಮಾಡಬೇಕು ಎಂದು ಸ್ಥಳದಲ್ಲಿ ವಕೀಲರು ಪಟ್ಟು ಹಿಡಿದು ಒಳನುಗ್ಗಲು ಯತ್ನಿಸಿದರು.
ಆಗ ವಕೀಲರನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಕೆಲ ಕಾಲ ಮಾತಿನ ಚಕಮಕಿ ನಡೆಯಿತು.ನಂತರ ಪರಿಸ್ಥಿತಿಯನ್ನು ತಿಳಿಗೊಳಿಸಲಾಯಿತು.