ಧಾರವಾಡ prajakiran.com : ಕಾಶ್ಮೀರಿ ವಿದ್ಯಾರ್ಥಿಗಳ ಪ್ರಕರಣದಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಜಾಕ್ಸನ್ ಡಿಸೋಜಾ ಅವರನ್ನು ಅಮಾನತುಗೊಳಿಸಿ ಬೆಳಗಾವಿಯ ಉತ್ತರ ವಲಯ ಪೊಲೀಸ್ ಮಹಾನಿರ್ದೇಶಕ ರಾಘವೇಂದ್ರ ಸುಹಾಸ್ ಆದೇಶಿಸಿದ್ದಾರೆ.
ಹುಬ್ಬಳ್ಳಿಯ ಕೆ ಎಲ್ ಇ ಸಂಸ್ಥೆಯ ಕಾಶ್ಮೀರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಬಾಸಿತ್ ಸೋಫಿ (19),ಅಮೀರ ಮೊಯಿನೋದ್ದೀನ್ (21), ತಾಲಿಬ್ ವಾನಿ (19) ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಫೆ. 15ರಂದು ಹುಬ್ಬಳ್ಳಿಯ ಕೊಟಗೊಂಡಹುಣಸಿ ಕ್ರಾಸ್ ಬಳಿಯ ಕೊಠಡಿಯಲ್ಲಿ ಸಂಭ್ರಮಾಚರಣೆ ಮಾಡಿದ್ದರು.
ಈ ವೀಡಿಯೋ ವೈರಲ್ ಆದ ಬೆನ್ನಲ್ಲೇ ಹುಬ್ಬಳ್ಳಿಯ ಗೋಕುಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರನ್ನು ಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸಲಾಗಿತ್ತು. ಆನಂತರ ಈ ಪ್ರಕರಣವನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ವರ್ಗಾಯಿಸಲಾಗಿತ್ತು.
ಈ ಪ್ರಕರಣದಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಹುಬ್ಬಳ್ಳಿಯ 2ನೇ ಜೆಎಂಎಫ್ ಸಿ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿತ್ತು. ಜಾಮೀನು ದೊರೆಯಲು ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ ಎಂಬ ಆರೋಪ ಹಾಗೂ ಹಿಂದುಪರ ಸಂಘಟನೆಗಳ ಮುಖಂಡರಿಂದ ಆಕ್ರೋಶ ವ್ಯಕ್ತವಾಗಿತ್ತು.
ಈ ಹಿನ್ನಲೆಯಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ತನಿಖಾಧಿಕಾರಿ ಜಾಕ್ಸನ್ ಡಿಸೋಜಾ ಅವರ ವಿರುದ್ದ ತನಿಖೆ ನಡೆಸಿ ವರದಿ ನೀಡುವಂತೆ ಗದಗ ಡಿವೈಎಸ್ಪಿ ಅವರನ್ನು ನೇಮಿಸಿ ಬೆಳಗಾವಿಯ ಉತ್ತರ ವಲಯ ಪೊಲೀಸ್ ಮಹಾನಿರ್ದೇಶಕ ರಾಘವೇಂದ್ರ ಸುಹಾಸ್ ಆದೇಶ ಹೊರಡಿಸಿದ್ದರು.
ಇನ್ಸಪೆಕ್ಟರ್ ಜಾಕ್ಸನ್ ಡಿಸೋಜಾ ಅವರು ಸಿ ಆರ್ ಪಿಸಿ 167 (2) ಅಡಿ 90 ದಿನಗಳ ಒಳಗೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸದ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿದುಬಂದಿದೆ.
ಗಂಭೀರ ಪ್ರಕರಣದಲ್ಲಿಯೂ ಸಹ ಇನ್ಸಪೆಕ್ಟರ್ ಕರ್ತವ್ಯ ನಿರ್ಲಕ್ಷ್ಯ ತೋರಿದ ಹಿನ್ನಲೆಯಲ್ಲಿ ಅಮಾನತು ಮಾಡಿ ಇಲಾಖೆಗೆ ಚುರುಕು ಮುಟ್ಟಿಸಲಾಗಿದೆ ಎಂದು ಹೇಳಲಾಗುತ್ತಿದೆ.