ಬೆಂಗಳೂರು prajakiran.com : ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಕೊನೆಗೂ ನಿರೀಕ್ಷೆಯಂತೆ ಸಿಹಿ ಸುದ್ದಿ ನೀಡಿದೆ.
ರಿಪಿಟರ್ಸ್ ಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವುದಾಗಿ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ರಾಜ್ಯ ಸರ್ಕಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಮಾತ್ರವಲ್ಲ ಹಳೆಯ ವಿದ್ಯಾರ್ಥಿಗಳನ್ನು ಕೂಡ ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು.
ರೀಪೀಟರ್ಸ್ ಗಳಿಗೆ ಶೇ.35ರಷ್ಟು ಅಂಕ ನೀಡಲಾಗುವುದು ಎಂದು ವಿವರವಾದ ಅಫಿಡೇವಿಟ್ ಸಲ್ಲಿಸಿದೆ.
ಇದೇ ವೇಳೆ ಹೈಕೋರ್ಟ್, ಜುಲೈ 31ರೊಳಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಈ ಬಾರಿ ದ್ವಿತಿಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವುದಾಗಿ ಘೋಷಿಸಿದ್ದ ಸರ್ಕಾರ ರಿಪೀಟರ್ಸ್ ಗೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿತ್ತು.
ಹೀಗಾಗಿ ಸರ್ಕಾರದ ತಾರತಮ್ಯ ನೀತಿ ಖಂಡಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿ, ಚಾಟಿ ಬೀಸಿತ್ತು.
ಅಲ್ಲದೆ, ಪಾಸ್ ಮಾಡುವುದಾದರೆ ಎಲ್ಲರನ್ನೂ ಪಾಸ್ ಮಾಡಿ ಇಲ್ಲವೇ ಪರೀಕ್ಷೆ ನಡೆಸಿ ಎಂದು ಸೂಚಿಸಿತ್ತು.
ಹೀಗಾಗಿ ರಾಜ್ಯ ಸರ್ಕಾರ ಕೊನೆಗೂ ಎಚ್ಚೆತ್ತುಕೊಂಡು ಫೇಲಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವುದಾಗಿ ತಿಳಿಸಿದೆ.