ನವದೆಹಲಿ ಪ್ರಜಾಕಿರಣ.ಕಾಮ್ : ಮೋದಿ ಹೆಸರಿನ ಎಲ್ಲರೂ ಕಳ್ಳರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದರಾಗಿರುವ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್ ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ಹಾಗೂ ಹಾಗೂ 15 ಸಾವಿರ ದಂಡ ವಿಧಿಸಿದೆ.
ಇದರ ಬೆನ್ನಲ್ಲಿಯೇ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಸೂರತ್ ಕೋರ್ಟ್ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲಿಯೇ ರಾಹುಲ್ ಗಾಂಧಿ ಜಾಮೀನು ಪಡೆದು ದೆಹಲಿಗೆ ವಾಪಸಾಗಿದ್ದರು.
ಆದರೆ, ಜನಪ್ರತಿನಿಧಿ ಕಾಯ್ದೆ 1951ರ ಪ್ರಕಾರ ರಾಹುಲ್ ಗಾಂಧಿ ಅವರನ್ನು ವಯನಾಡು ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ ಎಂದು ಲೋಕಸಭಾ ಕಾರ್ಯಾಲಯದಿಂದ ಅಧಿಕೃತ ಆದೇಶ ನೀಡಲಾಗಿದೆ.
ಕ್ರಿಮಿನಲ್ ಮೊಕದ್ದಮೆಯಲ್ಲಿ ಅವರು ದೋಷಿ ಎಂದು ತೀರ್ಮಾನವಾಗಿರುವ ಕಾರಣ ಅವರ ಲೋಕಸಭೆ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ ಎಂದು ವಿವರಿಸಲಾಗಿದೆ.
ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿಗೆ 30 ದಿನಗಳ ಕಾಲಾವಕಾಶ ಇದೆ. ಆದರೂ, ಲೋಕಸಭಾ ಸದಸ್ಯ ಸ್ಥಾನದಿಂದ ತರಾತುರಿಯಲ್ಲಿ ಅನರ್ಹ ಗೊಳಿಸಿರುವುದು ಹಲವು ಚರ್ಚೆ ಹುಟ್ಟುಹಾಕಿದೆ.
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕೋಲಾರದಲ್ಲಿ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅವರ ಪರ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೆಸರು ಹೊಂದಿದ ಬಹುತೇಕ ಜನ ಕಳ್ಳರು.
ನೀರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.
ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.