ಬೆಂಗಳೂರು Prajakiran.com : ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಪ್ರವಾಹ, ಕೋವಿಡ್ ಪರಿಸ್ಥಿತಿ, ಹಾಗೂ ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದೆ.
ಮುಂದಿನ ಚುನಾವಣೆಗೆ ನಾವು ಸಿದ್ದರಾಗಬೇಕು. ಉಪಚುನಾವಣೆ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಿಸಲು ಸನ್ನದ್ದರಾಗಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪಕ್ಷದ ಮುಖಂಡರಿಗೆ ಹೇಳಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಕೊರೋನಾ ದಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರಿದೆ.
ಆದರೂ ಆರ್ಥಿಕ ಸಂಕಷ್ಟಕ್ಕೊಳಗಾದವರಿಗೆ ಸರ್ಕಾರದಿಂದ ವಿಶೇಷ ಪರಿಹಾರ, ಕೋವಿಡ್ ನಿಂದ ಮೃತಪಟ್ಟವರಿಗೆ ಒಂದು ಲಕ್ಷ ಪರಿಹಾರ, ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಬಾಲಸೇವೆ ಯೋಜನೆ ತಂದಿದ್ದೇವೆ.
ಕೇಂದ್ರದ ಸಹಕಾರದೊಂದಿಗೆ ಸರ್ಕಾರ ಕೋವಿಡ್ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದೆ ಎಂದರು.
ಹಂತ ಹಂತವಾಗಿ ಅನ್ಲಾಕ್ ಮಾಡುವ ಮೂಲಕ ಜನ ಸಾಮಾನ್ಯರ ಜೀವನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ರಾಜ್ಯದಲ್ಲಿ ಲಸಿಕಾ ಉತ್ಸವ ಕೂಡ ಯಶಸ್ವಿಯಾಗಿದೆ. ಇದು ಕೂಡ ಒಂದು ಐತಿಹಾಸಿಕ ದಾಖಲೆಯಾಗಿದೆ.
ಲಸಿಕೆಯಲ್ಲಿ ರಾಜ್ಯವೂ ರಾಷ್ಟ್ರದಲ್ಲಿ ಎರಡನೇ ಸ್ಥಾನದಲ್ಲಿರುವುದು ಸಂತೋಷದ ಸಂಗತಿ ಎಂದು ಹೇಳಿದರು.
ದೆಹಲಿಯಿಂದ ವರ್ಚುವಲ್ ಮೂಲಕ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪಕ್ಷ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖಂಡರು ಭಾಗವಹಿಸಿದ್ದರು.