ಧಾರವಾಡ prajakiran. com : ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮಿಣ ಸಿಪಿಐ ಶ್ರೀಧರ ಸತಾರೆ ಅಮಾನತ್ಗೊಂಡಿದ್ದಾರೆ.
ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆಯ ಮಾಲಿಕತ್ವದ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಪ್ರಸ್ತುತ ಸಭಾಪತಿಯೂ ಆಗಿರುವ ಬಸವರಾಜ ಹೊರಟ್ಟಿ ಅವರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿ, ಹೊರಟ್ಟಿಯೂ ಸೇರಿದಂತೆ ಹಲವರ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು.
ದೂರಿನನ್ವಯ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಇನ್ನಿತರರ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.
ಬಳಿಕ ಸಭಾಪತಿಯಂತಹ ಸಾಂವಿಧಾನಿಕ ಹುದ್ದೆಯಲ್ಲಿರುವ ಹೊರಟ್ಟಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ ವಿಷಯ ಸದನದಲ್ಲಿಯೂ ಪ್ರತಿಧ್ವನಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು, ಗೃಹಸಚಿವರು ಇರುಮುರುಸು ಅನುಭವಿಸುವಂತಾಗಿತ್ತು.
ಈ ವಿಷಯದಲ್ಲಿ ಜಿಲ್ಲಾ ಪೊಲೀಸ್ ಅಧಿಕಾರಿಗಳ ಮೇಲೆಯೂ ಕ್ರಮ ಜರುಗಿಸಬೇಕು ಎಂದು ಸದನದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಪಕ್ಷಭೇದ ಮರೆತು ಒತ್ತಾಯಿಸಿದ್ದರು.
ಈ ಪ್ರಕರಣದಲ್ಲಿ ಇದೀಗ ಸಿಪಿಐ ಶ್ರೀಧರ ಸತಾರೆ ಅವರನ್ನು ಕರ್ತವ್ಯ ಲೋಪದ ಆಧಾರದ ಮೇಲೆ ಡಿಜಿಪಿ ಪ್ರವೀಣ ಸೂದ ಅವರು ಅಮಾನತ್ ಮಾಡಿದ್ದಾರೆ.
ಇನ್ನೊಂದೆಡೆ ಜಿಲ್ಲಾ ಪೊಲೀಸ್ ಅಧಿಕಾರಿಗಳ ಮೇಲೆಯೂ ಕ್ರಮ ಜರುಗಿಸಬೇಕು ಎಂಬ ಒತ್ತಡ ಸರಕಾರದ ಮೇಲಿದ್ದು, ಮುಂದೆ ಯಾವ ಕ್ರಮ ಜರುಗಲಿದೆ ಎಂಬುದನ್ನು ಕಾದು ನೋಡಬೇಕಿದೆ.