ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಮಹಿಳಾ ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಸಾನಿಕಾ ರಾಜ್ಯಕ್ಕೆ ದ್ವಿತೀಯ ರ್ಯಾಂಕ್
ಧಾರವಾಡ prajakiran.com ಜೂ.18 : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಏಪ್ರೀಲ್-ಮೇ 2022 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಧಾರವಾಡ ಜಿಲ್ಲೆಯ 25,193 ವಿದ್ಯಾರ್ಥಿಗಳ ಪೈಕಿ 15,137 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣ ನಾಯಕ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆಗೆ 21,995 ಹಾಗೂ 603 ಖಾಸಗಿ ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 14,442 ವಿದ್ಯಾರ್ಥಿಗಳು ಮತ್ತು 155 ಖಾಸಗಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಜಿಲ್ಲೆಗೆ ಶೇ.65.66 ರಷ್ಟು ಫಲಿತಾಂಶ ಬಂದಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಗೆ ಪಿಯುಸಿ ಕಲಾ ವಿಭಾಗದಲ್ಲಿ ಶೇ.55.1 ರಷ್ಟು, ವಾಣಿಜ್ಯ ವಿಭಾಗದಲ್ಲಿ ಶೇ.63.82 ರಷ್ಟು ಮತ್ತು ವಿಜ್ಞಾನ ವಿಭಾಗದಲ್ಲಿ ಶೇ.74.68 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ನಗರ ಪ್ರದೇಶದಲ್ಲಿ ಶೇ.67.23 ರಷ್ಟು ಮತ್ತು ಗ್ರಾಮೀಣ ವಿಭಾಗದಲ್ಲಿ 54.88 ರಷ್ಟು ಫಲಿತಾಂಶ ಬಂದಿದೆ.
ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಮಹಿಳಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಾನಿಕಾ ರವಿಶಂಕರ ಅವರು 593 ಅಂಕಗಳನ್ನು ಗಳಿಸುವ ಮೂಲಕ ಪಿಯುಸಿ ಕಲಾವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಗಳಿಸಿದ್ದು, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದೆ. ಸಾಧಕ ವಿದ್ಯಾರ್ಥಿನಿ ಸಾನಿಕಾ ರವಿಶಂಕರ ಅವರನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಅವರು ಅಭಿನಂದಿಸಿದ್ದಾರೆ ಎಂದು ಉಪನಿರ್ದೇಶಕ ಕೃಷ್ಣ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.