ಧಾರವಾಡ prajakiran.com : ಕರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಜೂನ್ ೧ ರಿಂದ ಜೂನ್ ೮ ರವರೆಗೆ ಜಿಲ್ಲೆಯಾದ್ಯಂತ ಸಿಆರ್ಪಿಸಿ ೧೯೭೩ ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ ಹಾಗೂ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿರುತ್ತದೆ.
ಅಲ್ಲದೆ, ೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.
ಕರ್ಫ್ಯೂ ಅವಧಿಯಲ್ಲಿ ಸಾರ್ವಜನಿಕರು ತುರ್ತು ವೈದ್ಯಕೀಯ ಕಾರ್ಯ ಹೊರತುಪಡಿಸಿ ಅನಗತ್ಯವಾಗಿ ತಿರುಗಾಡುವುದನ್ನು ನಿರ್ಬಂಧಿಸಿದೆ.
ಕರ್ಫ್ಯೂ ಅವಧಿಯಲ್ಲಿ ಜಿಲ್ಲೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ಕೇವಲ ೫೦ ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಶವ ಸಂಸ್ಕಾರ ಕಾರ್ಯದಲ್ಲಿ ಕೇವಲ ೨೦ ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.
ಶಿಕ್ಷಣ, ತರಬೇತಿ, ಕೋಚಿಂಗ್ ಸಂಸ್ಥೆಗಳು, ಹೊಟೆಲ್ ರೆಸ್ಟೋರೆಂಟ್, ಬಾರ್ ಸೇರಿದಂತೆ ಆತಿಥ್ಯ ಸೇವೆಗಳೆಲ್ಲವನ್ನು ನಿರ್ಬಂಧಿಸಲಾಗಿದೆ.
ಆದರೆ ಆನ್ಲೈನ್ ಕ್ಲಾಸ್ಗಳು ಹಾಗೂ ದೂರ ಸಂವೇದಿ ಕಲಿಕೆಗೆ ಇದು ಅನ್ವಯಿಸುವುದಿಲ್ಲ, ಸಂತೆ, ಜಾತ್ರೆ, ಸಮಾವೇಶ ಸಿನಿಮಾ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ, ಪ್ರಾರ್ಥನಾ ಸ್ಥಳಗಳು, ಚಿತ್ರಮಂದಿರ, ಮಾಲ್, ಜಿಮ್ ರಾಜಕೀಯ ಪಕ್ಷಗಳ ಸಮಾವೇಶ ಹಾಗೂ ಯಾವುದೇ ಧಾರ್ಮಿಕ ಸಮಾರಂಭಗಳು ಜರುಗುವುದನ್ನು ನಿರ್ಬಂಧಿಸಲಾಗಿದೆ.
ಎಲ್ಲಾ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಕ್ರೀಡಾ ಚಟುವಟಿಕೆಗಳು ಜರಗುವುದನ್ನು ನಿರ್ಬಂಧಿಸಲಾಗಿದೆ. ಸರಕಾರಿ ವಾಹನಗಳಿಗೆ ಮತ್ತು ಕೋವಿಡ್ -೧೯ ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ.
ರಾತ್ರಿ ೯ ಗಂಟೆಯಿಂದ ಬೆಳಿಗ್ಗೆ ೫ ಗಂಟೆಯವರೆಗೆ ಸಾರ್ವಜನಿಕ ತುರ್ತು ವೈದ್ಯಕೀಯ ಕಾರ್ಯ ಹೊರತುಪಡಿಸಿ ಅನಗತ್ಯವಾಗಿ ತಿರುಗಾಡುವುದನ್ನು ನಿರ್ಬಂಧಿಸಿದೆ.
ಹೋಟೆಲ್ಗಳು ಎಂದಿನಂತೆ ಪಾರ್ಸೆಲ್ ಸೇವೆ ಮಾತ್ರ ನೀಡಬಹುದು. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ ೧೮೮ ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಎಚ್ಚರಿಸಿದ್ದಾರೆ.