ಹುಬ್ಬಳ್ಳಿ prajakiran.com :
ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಚಿವ ಸಂಪುಟ ಸೇರಲು ಹಲವು ಶಾಸಕರು ಕಸರತ್ತು ನಡೆಸಿರುವುದು ಎಲ್ಲರಿಗೂ ತಿಳಿದ ವಿಷಯ.
ಆದರೆ, ಬಿ.ಎಸ್. ಯಡಿಯೂರಪ್ಪ ಸರ್ಕಾರದಲ್ಲಿ ಕೈಗಾರಿಕಾ ಸಚಿವರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈ ಬಾರಿ ಬೊಮ್ಮಾಯಿ ಸಂಪುಟ ಸೇರದಿರಲು ನಿರ್ಧರಿಸಿದ್ದಾರೆ.
ಹೌದು ಇದು ಅಚ್ಚರಿಯಾದ್ರೂ
ಈ ಕುರಿತು ಸ್ವತ: ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು ಅಚ್ಚರಿಗೆ ಹಾಗೂ ಎಲ್ಕರ ಕುತೂಹಲಕ್ಕೆ ಕಾರಣವಾಗಿದೆ.
ಅವರು ಗುರುವಾರ ಹುಬ್ಬಳ್ಳಿಯಲ್ಲಿ
ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ಪ್ರಕಟಿಸಿದರು.
ನಾನು ಬೊಮ್ಮಾಯಿ ಸಂಪುಟಕ್ಕೆ ಸೇರುವುದಿಲ್ಲ. ನಾನು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕನಿದ್ದೇನೆ,
ಪಕ್ಷದ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಕೆಲಸ ಮಾಡುತ್ತೇನೆ ಹೊರತು ಸಂಪುಟ ಸೇರುವುದಿಲ್ಲ ಎಂದು ವಿವರಿಸಿದ್ದಾರೆ.
ಅಲ್ಲದೆ, ಇದು ನನ್ನ ವೈಯಕ್ತಿಕ ನಿರ್ಧಾರವಾಗಿದೆ. ಇದರ ಹಿಂದೆ ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ನನ್ನ ನಿರ್ಧಾರದ ಕುರಿತು ಈಗಾಗಲೇ ಮಾಜಿ ಸಿಎಂ ಬಿಎಸ್ ವೈ ಹಾಗೂ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೂ ತಂದಿದ್ದೇನೆ ಎಂದು ಶೆಟ್ಟರ್ ಹೇಳಿದರು.
ಒಂದು ವೇಳೆ ಪಕ್ಷದ ವರಿಷ್ಠರು ನನಗೆ ಜವಾಬ್ದಾರಿ ಕೊಟ್ಟರೆ ಅದನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದರು.
ಜಗದೀಶ್ ಶೆಟ್ಟರ್ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಅದರಲ್ಲೂ ಬಿಜೆಪಿ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಮುಂದಿನ ಬೆಳವಣಿಗೆ ಕಾಯ್ದು ನೋಡಬೇಕು.