ಹುಬ್ಬಳ್ಳಿ-ಧಾರವಾಡ praajakiran.com : ಜೂನ್ ೨೫ ರಿಂದ ಜುಲೈ ೪ ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ಹಾಗೂ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಗಟ್ಟಲು ಹುಬ್ಬಳ್ಳಿ-ಧಾರವಾಡ ನಗರದ ೪೬ ಪರೀಕ್ಷಾ ಕೇಂದ್ರಗಳ ಸುತ್ತ ಸೆಕ್ಷನ್ ೧೪೪ ಕಲಂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತ ಮತ್ತು ಸುಗಮವಾಗಿ ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಸಿಆರ್ಪಿಸಿ ಕಲಂ ೧೪೪ ಹಾಗೂ ೨೦ ರ ಪ್ರಕಾರ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಮತ್ತು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರ್ ಆರ್.ದಿಲೀಪ್ ಅವರು ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ ಪ್ರದೇಶವನ್ನು ನಿರ್ಭಂದಿತ ಪ್ರದೇಶವೆಂದು ಘೋಷಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸಮೀಪವಿರುವ ಝರಾಕ್ಸ್ ಮತ್ತು ಕಂಪ್ಯೂಟರ್ ಸೆಂಟರ್, ಅಂಗಡಿಗಳು ಪರೀಕ್ಷಾ ಸಮಯದಲ್ಲಿ ಕಾರ್ಯನಿರ್ವಹಿಸದಂತೆ ನಿಷೇದಾಜ್ಞೆ ಆದೇಶ ಹೊರಡಿಸಿದ್ದಾರೆ.
ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ದ ಕಲಂ ೧೮೮ ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮವನ್ನು ಜರುಗಿಸಲು ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.