ಧಾರವಾಡ prajakiran.com : ವಿದ್ಯಾಗಮ ಕಾರ್ಯಕ್ರಮದ ಪರಿಶೀಲನೆಗಾಗಿ ಧಾರವಾಡ ಗ್ರಾಮೀಣ ವಿಭಾಗದ ಸಲಕಿನಕೊಪ್ಪ ಹಾಗೂ ಬಾಡ ಗ್ರಾಮಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಅವರು ಮಕ್ಕಳಿಂದ ನಾಡಗೀತೆ ಹಾಡಿಸಿ ಪಾಠ, ಮಗ್ಗಿ ಹೇಳಿಸಿ ಮಕ್ಕಳ ಶಿಕ್ಷಣಮಟ್ಟ ಪರೀಕ್ಷಿಸಿದರು.
ಸಲಕಿನಕೊಪ್ಪ ಗ್ರಾಮದಲ್ಲಿ ವಿದ್ಯಾಗಮ ಪಾಠದಲ್ಲಿ ನಿರತರಾಗಿರುವ ಮಕ್ಕಳಿಗೆ ಭಾರತದ ಮೊದಲ ರಾಷ್ಟ್ರಪತಿ ಯಾರು, ಮಗ್ಗಿಯನ್ನು ಕ್ರಮವಾಗಿ ಹಾಗೂ ವಿರುದ್ಧವಾಗಿ ಹೇಳಿಸಿದರು.
ಮಕ್ಕಳ ಕೈಬರಹ ಕಂಡು ಸಂತಸಪಟ್ಟರು. ಕೊರೊನಾ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳನ್ನು ಮಕ್ಕಳಿಂದ ವಿವರಿಸಲು ಹೇಳಿದರು. ಹಾಗೂ ಶಾಲೆ ಪುನರಾರಂಭದ ಕುರಿತು ಮಕ್ಕಳ ಅಭಿಪ್ರಾಯ ಆಲಿಸಿದರು.
ಬಾಡ ಗ್ರಾಮದಲ್ಲಿ ಮಕ್ಕಳಿಂದ ನಾಡಗೀತೆ ಹಾಡಿಸಿದ ಸಚಿವರು, ನಾಡಗೀತೆಯ ರಚನೆಕಾರರು, ರಾಷ್ಟçಗೀತೆಯ ಕರ್ತೃ, ಅವರಿಗೆ ದೊರೆತ ಪ್ರಶಸ್ತಿಗಳು, ಭಾರತದ ಈಗಿನ ರಾಷ್ಟçಪತಿ ಯಾರು ಎಂಬ ಪ್ರಶ್ನೆಗಳನ್ನು ಕೇಳಿ ಕಲಿಕಾಮಟ್ಟ ಪರಿಶೀಲಿಸಿದರು.
ಮಕ್ಕಳನ್ನು ಕೊರೊನಾ ಸೋಂಕಿನಿಂದ ರಕ್ಷಿಸುವುದು ಹಾಗೂ ನಿರಂತರವಾಗಿ ಕಲಿಕೆಯ ಸಂಪರ್ಕದಲ್ಲಿ ಇರಿಸುವ ಉದ್ದೇಶದಿಂದ ರಾಜ್ಯದಾದ್ಯಂತ ವಿದ್ಯಾಗಮ ಕಾರ್ಯಕ್ರಮ ಜಾರಿಗೊಳಿಸಲಾಗಿದೆ.
ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿಯಂತ್ರಣಕ್ಕೂ ವಿದ್ಯಾಗಮ ಸಹಕಾರಿಯಾಗಲಿದೆ ಎಂದು ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್. ಸುರೇಶಕುಮಾರ್ ಹೇಳಿದರು.
ಜಿಲ್ಲೆಯ ಸಲಕಿನಕೊಪ್ಪ ಮತ್ತು ಬಾಡ ಗ್ರಾಮಗಳಲ್ಲಿ ವಿದ್ಯಾಗಮ ಚಟುವಟಿಕೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.
ಶಾಲೆಯಿಂದ ಮಕ್ಕಳು ಹೊರಗುಳಿದರೆ ಅವರನ್ನು ಪುನ: ಮುಖ್ಯವಾಹಿನಿಗೆ ಕರೆತರುವುದು ಕಷ್ಟವಾಗಲಿದೆ.
ಸರ್ಕಾರಿ ಶಾಲೆಗಳಷ್ಟೇ ಅಲ್ಲದೇ ಖಾಸಗಿ ಶಾಲೆಗಳು ಕೂಡಾ ವಿದ್ಯಾಗಮ ಕಾರ್ಯಕ್ರಮ ಅನುಷ್ಠಾನಗೊಳಿಸಬಹುದು ಅಥವಾ ಇದಕ್ಕಿಂತಲೂ ಉತ್ತಮವಾದ ಚಟುವಟಿಕೆಯೊಂದಿಗೆ ಮಕ್ಕಳ ಸಂಪರ್ಕ ಹೊಂದಿರಬೇಕು.
ವಿದ್ಯಾಗಮ ಯಶಸ್ವಿಗೆ ಧಾರವಾಡ ವಿಭಾಗದ ಶಿಕ್ಷಕರು ಉತ್ತಮ ಕಾರ್ಯ ಮಾಡುತ್ತಿದ್ದಾರೆ.
ಹಳ್ಳಿಗಳಲ್ಲಿ ಸರದಿ ಆಧಾರದಲ್ಲಿ ಎಲ್ಲ ಪ್ರದೇಶಗಳಲ್ಲಿ ಶಿಕ್ಷಕರು ತೆರಳಿ ಪಠ್ಯದ ಕುರಿತು ಮಕ್ಕಳಲ್ಲಿರುವ ಸಂದೇಹಗಳನ್ನು ನಿವಾರಿಸುತ್ತಿದ್ದಾರೆ.
ಇದು ಶಾಲೆಯ ಬಗ್ಗೆ ಮಕ್ಕಳ ಆಸಕ್ತಿಯನ್ನು ಉಳಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.