*ಹೈಕೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂಕೋರ್ಟ್, ಮಧ್ಯಪ್ರವೇಶಕ್ಕೆ ನಿರಾಕರಣೆ*
*ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಅರ್ಜಿ ವಿಚಾರಣೆ ಬಾಕಿ*
ನವದೆಹಲಿ ಪ್ರಜಾಕಿರಣ.ಕಾಮ್ : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಪಂ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ರದ್ದು ಪಡಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಸುಮೋವಾರ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಸಂಜಯಕುಮಾರ್ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್ ಅವರ ಮುಂದೆ ಅರ್ಜಿ ವಿಚಾರಣೆಗೆ ಬಂದಿತ್ತು.
ಅವರು ಬೆಂಗಳೂರಿನ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಅದರಲ್ಲಿ ಮಧ್ಯ ಪ್ರವೇಶ ಮಾಡಲು ನಿರಾಕರಿಸಿದರು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ವಿನಯ ಕುಲಕರ್ಣಿ ಅವರಿಗೆ ಸುಪ್ರೀಂಕೋರ್ಟ್ ಮತ್ತೆ ಚಾಟಿ ಬೀಸಿದೆ.
ಇದರಿಂದಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ.
ಸಿಬಿಐ ತನಿಖೆ ವೇಳೆ ಮಾಜಿ ಸಚಿವ ವಿನಯ ಕುಲಕರ್ಣಿ, ಅವರ ಸಹೋದರ ವಿಜಯ ಕುಲಕರ್ಣಿ, ಅವರ ಸೋದರ ಮಾವ ಚಂದ್ರಶೇಖರ ಇಂಡಿ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳ ಪಾತ್ರ ಕುರಿತು ಬಯಲಿಗೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿಯನ್ನು ಬಂಧಿಸಿ ಒಂಬತ್ತು ತಿಂಗಳ ಕಾಲ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿಗೆ ಕಳುಹಿಸಿದಲ್ಲದೆ,
ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ದ ಅಂದಾಜು ಹತ್ತು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು.
ಸದ್ಯ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಾಕಿಯಿದೆ.
ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲು ಹತ್ತಿದ್ದ ವಿನಯ ಕುಲಕರ್ಣಿ ವಿರುದ್ದ ಹೈಕೋರ್ಟ್ ಜನಪ್ರತಿನಿಧಿಗಳ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಏಪ್ರಿಲ್ 8ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆ ಎದುರಿಸಲು ಸೂಚಿಸಿದ್ದರು.
ಜೊತೆಗೆ ಮೂರು ತಿಂಗಳ ಒಳಗೆ ಪ್ರಕರಣ ಇತ್ಯರ್ಥಕ್ಕೆ ನಿರ್ದೇಶನ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.