ವಿಜಯಪುರ prajakiran.com : ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರೋಗಿಯ ಚಿಕಿತ್ಸೆಯನ್ನು ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ ಹಿನ್ನೆಲೆ ಕುಟುಂಬಸ್ಥರು ಕಾರ್ನಲ್ಲಿ ರೋಗಿಯೊಂದಿಗೆ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಘಟನೆ ಶುಕ್ರವಾರ ನಡೆದಿದೆ.
ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ಜಮೀಲ್ ಅಹಮ್ಮದ್ ಎಂಬವರು ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು.
ಗುರುವಾರ ತಡ ರಾತ್ರಿ ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆತಂದಿದ್ದಾರೆ.
ರೋಗಿ ತೀವ್ರ ಉಸಿರಾಟದಿಂದ ಬಳಲಿದರೂ ಕೂಡ ನಗರದ ಖಾಸಗಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡದೇ ಬೇರೆ ಬೇರೆ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಕೊನೆಗೆ ಜಿಲ್ಲಾಸ್ಪತ್ರೆಗೆ ತೆರಳಿದಾಗ, ಜಿಲ್ಲಾಸ್ಪತ್ರೆಯಲ್ಲಿ ರೋಗಿಯನ್ನು ಚೆಕ್ ಮಾಡಿ ದಾಖಲಿಸಿಕೊಳ್ಳದೇ ಕಳುಹಿಸಲಾಗಿದೆ.
ಹೀಗಾಗಿ ರಾತ್ರಿಯಿಡಿ ಅಲೆದಾಡಿದ ರೋಗಿಯ ಕುಟುಂಬದವರು, ರೋಗಿ ಸಮೇತ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ.
ಈ ಸಂದರ್ಭ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಕುಟುಂಬಸ್ಥರೊಂದಿಗೆ ಸ್ಪಂದಿಸಿ, ರೋಗಿಯ ಸ್ಥಿತಿಯನ್ನು ಕಂಡು, ಜಿಲ್ಲಾ ವೈದ್ಯಾಧಿಕಾರಿಗೆ ಫೋನ್ ಮಾಡಿ, ರೋಗಿಯನ್ನು ದಾಖಲಿಸಿಕೊಳ್ಳುವಂತೆ ಸೂಚಿಸಿದ್ದಾರೆ.
ಕೊರೋನಾ ಸೋಂಕಿನಿ ಹಿನ್ನೆಲೆ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ.
ಗುಮ್ಮಟ ನಗರಿ ವಿಜಯಪುರದಲ್ಲಿಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೋನಾ ಸಂಕಷ್ಟ ಕಾಲದ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.