ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನವಾಗಿ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಲಾಯಿತು .
ಗುರುವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾರ್ಯಮೂರ್ತಿ ಕೆ. ನಟರಾಜನ್ ಅವರು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪರ ವಕೀಲ ಶಶಿಕಿರಣ ಶೆಟ್ಟಿ ವಾದ ಆಲಿಸಿದ ಪ್ರತಿವಾದ ವನ್ನು ಎಪ್ರಿಲ್ 17 ಇರಿಸಿ ಮುಂದೂಡಿ ಮಹತ್ವದ ಆದೇಶ ಹೊರಡಿಸಿದರು.
ಈ ಹಿಂದೆ ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದರು.
ಇದೀಗ ಸಿಬಿಐ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಮತ್ತೆ ಅವರ ಎದುರು ಜಾಮೀನು ಅರ್ಜಿ ವಿಚಾರಣೆಗೆ ಬಂದಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಸಿಬಿಐ ಅಧಿಕಾರಿಗಳ ಪರ ವಕೀಲರು
ಮಾಜಿ ಸಚಿವರ ಪರ ವಕೀಲರ ವಾದಕ್ಕೆ ಏನೆಲ್ಲಾ ತಕರಾರು ಹಾಗೂ ಪ್ರತಿ ವಾದ ಮಂಡಿಸಲಿದ್ದಾರೆ ಎಂಬುದರ ಮೇಲೆ ಅವರಿಗೆ ಜಾಮೀನು ನೀಡಬೇಕಾ ಬೇಡವಾ ಎಂಬುದನ್ನು ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರು ನಿರ್ಧರಿಸಲಿದ್ದಾರೆ.
ಈಗಾಗಲೇ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ, ಧಾರವಾಡ ಹೈಕೋರ್ಟ್ ಮತ್ತು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.