ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನವಾಗಿ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಕೋರಿ ಹೈಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ.
ಬೆಂಗಳೂರು ಹೈಕೋರ್ಟ್ ಪೀಠದ ಹಿರಿಯ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ನಾ ಅವರ ಎದುರು ಶುಕ್ರವಾರ ಜಾಮೀನು ಅರ್ಜಿ ವಿಚಾರಣೆ ನಡೆಯಿತು.
ಬಳಿಕ ಸಿಬಿಐ ಗೆ ನೋಟಿಸ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಮಂಗಳವಾರ ನಡೆಸಲಿದೆ.
ಸಿಬಿಐ ಅಧಿಕಾರಿಗಳ ಪರ ವಕೀಲರು
ಮಂಗಳವಾರ ಏನೆಲ್ಲಾ ತಕರಾರು ಸಲ್ಲಿಸಲಿದ್ದಾರೆ.
ಅದಕ್ಕೆ ವಿನಯ ಕುಲಕರ್ಣಿ ಪರ ವಕೀಲರು ಪ್ರತಿವಾದ ಮಂಡಿಸಲಿದ್ದಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.
ಈಗಾಗಲೇ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ, ಧಾರವಾಡ ಹೈಕೋರ್ಟ್ ಮತ್ತು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಸಿಬಿಐ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕವಷ್ಟೇ ಇತ್ತೀಚೆಗೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು.
ಹೀಗಾಗಿ ಮತ್ತೊಮ್ಮೆ ವಿನಯ ಕುಲಕರ್ಣಿ ಅವರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಇಲ್ಲಿ ಮತ್ತೊಂದು ಸುತ್ತಿನ ವಾದ ಪ್ರತಿವಾದ ನಡೆದ ಬಳಿಕ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ಸಿಗುತ್ತೋ ಇಲ್ಲವೋ ಎಂಬುದನ್ನು ಬರುವ ದಿನಗಳಲ್ಲಿ
ಕಾಯ್ದು ನೋಡಬೇಕಾಗಿದೆ.