ಧಾರವಾಡ ಪ್ರಜಾಕಿರಣ.ಕಾಮ್ : ಮಾಜಿ ಸಚಿವ ವಿನಯ ಕುಲಕರ್ಣಿಗೆ ಮೂರು ಗಂಟೆಗಳ ಕಾಲ ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಅನುಮತಿ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.
ಧಾರವಾಡ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ್ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಅವರ ಆರೋಗ್ಯ ವಿಚಾರಣೆಗೆ ಮಾಜಿ ಸಚಿವ ವಿನಯ ಕುಲಕರ್ಣಿ ಅನುಮತಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಇದಕ್ಕೆ ತಕರಾರು ಸಲ್ಲಿಸಿದ್ದ ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯವು ಷರತ್ತು ಬದ್ಧ ಪ್ರವೇಶಕ್ಕೆ ಅನುಮತಿ ನೀಡಿದೆ.
ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಿಬಿಐ ಕಳೆದ ವರ್ಷ ನ.5ರಂದು ಬಂಧಿಸಿದ್ದರು.
9 ತಿಂಗಳ ನಂತರ ಸುಪ್ರೀಂ ಕೋರ್ಟ್ ಮಾಜಿ ಸಚಿವ ವಿನಯ ಕುಲಕರ್ಣಿಗೆ ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಹೇರಿ, ಷರತ್ತು ಬದ್ದ ಜಾಮೀನು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಮಾಜಿ ಸಚಿವ ವಿನಯ ಕುಲಕರ್ಣಿ ಕೊನೆಗೂ ಒಂದು ವರ್ಷದ ಬಳಿಕ 3 ಗಂಟೆಗಳಿಗಾಗಿ ಧಾರವಾಡ ಜಿಲ್ಲೆ ಪ್ರವೇಶ ಮಾಡಲಿದ್ದಾರೆ.