ನವದೆಹಲಿ prajakiran.com : ಧಾರವಾಡ ಜಿಲ್ಲೆಯ ಬಿಜೆಪಿ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತನಾಗಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಅಗಸ್ಟ್ 10ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ.
ಪ್ರತ್ಯೇಕವಾಗಿ ಸಲ್ಲಿಕೆಯಾಗಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ, ವಿನಯ ಕುಲಕರ್ಣಿ ವಿರುದ್ದ ಸಿಬಿಐ ದಾಖಲಿಸಿರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ ಅರ್ಜಿ, ವಿನಯ ಸೋದರ ಮಾವ ಚಂದ್ರಶೇಖರ ಇಂಡಿ ವಿರುದ್ದ ಸಿಬಿಐ ದಾಖಲಿಸಿದ ಪ್ರಕರಣ ರದ್ದು ಕೋರಿ ಸಲ್ಲಿಸಿದ ಅರ್ಜಿ ಹಾಗೂ ಬಸವರಾಜ ಮುತ್ತಗಿ ಹೈಕೋರ್ಟ್ ನಲ್ಲಿ ಸಿಬಿಐ ತನಿಖೆಗೆ ತಡೆ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ರಾಜ್ಯ ಸರ್ಕಾರ ಹಾಗೂ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿ ಸೇರಿ ಒಟ್ಟು ಐದು ಅರ್ಜಿಗಳು ವಿಚಾರಣೆಗೆ ಬರದೆ ಇರುವ ಹಿನ್ನೆಲೆಯಲ್ಲಿ ಮುಂದೂಡಲಾಯಿತು.
ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠದ
ನ್ಯಾಯಮೂರ್ತಿಗಳಾದ ಉದಯ್ ಉಮೇಶ್ ಲಲಿತ್ , ಅಜಯ್ ರಸ್ತೋಗಿ ಹಾಗೂ ಅನಿರುದ್ದ್ ಬೋಸ್ ಅವರ ಪೀಠ ಈ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಪರ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ,, ಅಸೋಸಿಯೇಟ್ ಸಾಲಿಸಿಟರ್ ಜನರಲ್ ನಟರಾಜನ್, ಎಸ್.ವಿ. ರಾಜು ಹಾಜರಾಗಿದ್ದರು.
ಮಾಜಿ ಸಚಿವ ವಿನಯ ಕುಲಕರ್ಣಿ ಪರ ಹಿರಿಯ ವಕೀಲ ಕಪಿಲ್ ಸಿಬಲ್, ಸುರ್ಪಿತಾ ಶರಣಗೌಡರ ಸೇರಿದಂತೆ ಅನೇಕ ಹಿರಿಯ ವಕೀಲರು ಹಾಜರಿದ್ದರು.
ಈ ಅರ್ಜಿಯನ್ನು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಸ್ವೀಕರಿಸಬೇಕೆ ಬೇಡವೇ ಎಂಬುದನ್ನು ಸುಪ್ರೀಂಕೋರ್ಟ್, ಆಗಸ್ಟ್ 10ರಂದು ನಿರ್ಧರಿಸಲಿದೆ.
ಹೀಗಾಗಿ ಸುಪ್ರೀಂಕೋರ್ಟ್ ನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಗೆ ಜಾಮೀನು ಸಿಗುತ್ತಾ ಅಥವಾ ಅರ್ಜಿ ವಜಾಗೊಳ್ಳುತ್ತಾ ಎಂಬುದು ಕಾದು ನೋಡಬೇಕು.