ಧಾರವಾಡ prajakiran.com : ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಪಾಡುವ, ಸ್ಯಾನಿಟೈಜರ್ ಬಳಕೆ ಕುರಿತು ಜನಜಾಗೃತಿ ಮೂಡಿಸುವ ಕಾರ್ಯ ಅಗತ್ಯವಿದೆ.
ಸ್ವಯಂ ಸೇವಕರಾಗಿ ಪಾಲ್ಗೋಳ್ಳಲು ಸಿದ್ಧರಿರುವವರ ತಂಡ ರಚಿಸಿ, ಜನಜಾಗೃತಿ ಹೆಚ್ಚಿಸಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.
ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ನೂತನ ಸಭಾಂಗಣದಲ್ಲಿ ಸಾಮಾಜಿಕ ಅಂತರ ಕಾಪಾಡಲು ರಚಿಸಿರುವ ಸಮಿತಿ ಹಾಗೂ ವಿವಿಧ ಸ್ವಯಂ ಸೇವಾ ಸಮಿತಿ, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳ ಸಭೆ ಉದ್ದೇಶಿಸಿ, ಮಾತನಾಡಿದರು.
ಕೊರೊನಾ ನಿಯಂತ್ರಣಕ್ಕೆ ಸಮುದಾಯದಲ್ಲಿ ಕೊರೊನಾ ವೈರಸ್ ಕುರಿತು ತಿಳುವಳಿಕೆ ಮೂಡಿಸಬೇಕು.
ಈ ಕಾರ್ಯಕ್ಕಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ೬೭ ವಾರ್ಡಗಳಲ್ಲಿ ೬೭ ವಾರ್ಡ್ ಟಾಸ್ಕ್ ಪೊರ್ಸ್ ಸಮಿತಿಗಳನ್ನು ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ರಚಿಸಲಾಗಿದೆ.
ಸಮಿತಿಯಲ್ಲಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಸೇರಿ ೫ ಜನ ಸದಸ್ಯರಿರುತ್ತಾರೆ. ಇದರಲ್ಲಿ ಆಸಕ್ತ ಸ್ವಯಂ ಸೇವಕರನ್ನು ಸೇರಿಸಲಾಗುತ್ತದೆ. ಸಮಿತಿ ಸದಸ್ಯರಿಗೆ ಗುರುತಿನ ಚೀಟಿ ನೀಡಲಾಗುತ್ತದೆ ಎಂದು ಅವರು ಹೇಳಿದರು.
ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಅವರು ಮಾತನಾಡಿ, ವಾರ್ಡ್ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರಾಗಿ ಪಾಲಿಕೆ, ಕಂದಾಯ, ಪೊಲೀಸ್ ಇಲಾಖೆ ಅಧಿಕಾರಿಗಳು ಇರುತ್ತಾರೆ.
ಅವರು ಮಾಸ್ಕ್ ಧರಿಸದೆ ಇರುವವರಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವ, ತ್ಯಾಜ್ಯ ಚೆಲ್ಲುವವರ ವಿರುದ್ಧ ಅವರು ದಂಡ ವಿಧಿಸಲಿದ್ದಾರೆ ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶವಂತ ಕ್ಷೀರಸಾಗರ, ಅಬಕಾರಿ ಉಪ ಆಯುಕ್ತ ಶಿವನಗೌಡ ಪಾಟೀಲ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಭರಮಕ್ಕನವರ ಇದ್ದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಡಿವೈಎಸ್ ಪಿ ರವಿ ನಾಯ್ಕ, ಎಸಿಪಿ ಅನುಷಾ ಸೇರಿದಂತೆ ವಿವಿಧ ಅಧಿಕಾರಿಗಳು, ಅವಳಿನಗರದ ವಿವಿಧ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.